ಶಿಕ್ಷಣ ಸಚಿವರೊಂದಿಗೆ ಶಾಸಕ ಕೊಡ್ಗಿ ಸಮಾಲೋಚನೆ – ಖಾಲಿ ಹುದ್ದೆಗಳ ಭರ್ತಿಗೆ ಮನವಿ
ಬೆಂಗಳೂರು: ಕುಂದಾಪುರದ ಗ್ರಾಮೀಣ ಭಾಗಗಳಲ್ಲಿ ಶಿಕ್ಷಣಕ್ಕಿರುವ ಸಮಸ್ಯೆಗಳ ಬಗ್ಗೆ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಮೇ 27ರಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಸಮಗ್ರ ಶಿಕ್ಷಣ ಕರ್ನಾಟಕ (SSK) ಕಚೇರಿಯಲ್ಲಿ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಶಾಸಕ ಕಿರಣ್ ಕೊಡ್ಗಿ ಅವರು ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಕುಂದಾಪುರ ಕ್ಷೇತ್ರದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಸರ್ಕಾರ ಒತ್ತು ನೀಡುವಂತೆ ಗಮನ ಸೆಳೆದರು. ಕ್ಷೇತ್ರದ ಗ್ರಾಮೀಣ ಹಾಗೂ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವಂತೆ ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಮಧು ಬಂಗಾರಪ್ಪ ಅವರು, ಕ್ಷೇತ್ರದ ಶೈಕ್ಷಣಿಕ ಅಗತ್ಯತೆಗಳಿಗೆ ತಕ್ಷಣವೇ ಸ್ಪಂದಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
