ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗೆ ಶುಭಹಾರೈಸಿದ ಕಾಂಗ್ರೆಸ್ ಯುವ ಮುಖಂಡ ಅಶೋಕ್ ಪೂಜಾರಿ ಬೀಜಾಡಿ
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ, ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕುಂದಾಪುರ ಕಾಂಗ್ರೆಸ್ನ ಹಿರಿಯ ಮುಖಂಡ, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಭೇಟಿ ಮಾಡಿ ಶುಭ ಹಾರೈಸಿದರು.

ಬಿ.ಕೆ.ಹರಿಪ್ರಸಾದ್ ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಅಶೋಕ್ ಪೂಜಾರಿ, ಮುಂಬರುವ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಕುರಿತು ಇರುವ ಸವಾಲುಗಳ ಕುರಿತು ಚರ್ಚಿಸಿದರು. ಈ ಸಂದರ್ಭ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಪಿ.ವಿ. ಮೋಹನ್, ಯುವ ನಾಯಕ ರಕ್ಷಿತ್ ಶಿವರಾಮ್ ಮೊದಲಾದವರರು ಜೊತೆಗಿದ್ದರು.

ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿರುವ ಅಶೋಕ್ ಪೂಜಾರಿ, ಬಿಲ್ಲವ ಸಂಘಟನೆಯ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಕುಂದಾಪುರ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ, ಬಿಲ್ಲವ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ಮಹತ್ವ ಪಡೆದುಕೊಂಡಿದೆ.
