ವಿದ್ಯಾರ್ಥಿಗಳಲ್ಲಿ ಜರ್ನಲಿಸಂ ಆಸಕ್ತಿ ಕಡಿಮೆಯಾಗುತ್ತಿರುವುದು ಆತಂಕಕಾರಿ – ಡಾ.ಶುಭಾ ಹೆಚ್. ಎಸ್
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ
ಉಡುಪಿ: ಇತ್ತೀಚಿನ ವರ್ಷಗಳನ್ನು ಗಮನಿಸುವಾಗ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿರುವುದು ಕಂಡು ಬರುತ್ತಿದ್ದು, ಇದು ಆತಂಕಕಾರಿ ಸಂಗತಿ ಎಂದು ಮಣಿಪಾಲ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ನ ನಿರ್ದೇಶಕಿ ಡಾ.ಶುಭಾ ಎಚ್.ಎಸ್. ಹೇಳಿದ್ದಾರೆ.


ಅವರು ಜೂನ್ 1ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರತಿಕಾ ಭವನ ಸಮಿತಿ ಹಾಗೂ ಉಡುಪಿ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ಇವುಗಳ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡಿದರು.


ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಸಾಧ್ಯವಿರುವ ಕ್ಷೇತ್ರ ಜರ್ನಲಿಸಂ ಹಲವು ಸವಾಲುಗಳನ್ನೂ ಎದುರಿಸುತ್ತಿದೆ ಎಂದ ಅವರು, ಸಾಮಾಜಿಕ ಜಾಲತಾಣಗಳಿಂದ ಸಮಾಜದ ಮೇಲಾಗುತ್ತಿರುವ ಪರಿಣಾಮಗಳ ಜೊತೆಗೆ ನೈಜ ಪತ್ರಿಕೋದ್ಯಮಗಳು ತಮ್ಮ ಬದ್ಧತೆ ಪ್ರದರ್ಶಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ವಿದ್ಯಾರ್ಥಿನಿಯರೂ ಜರ್ನಲಿಸಂ ಬಗ್ಗೆ ಆಸಕ್ತಿವಹಿಸಿಕೊಂಡರೆ ಸಮಾಜವನ್ನು ಇನ್ನೊಂದು ಮಗ್ಗುಲಿನಿಂದ ಅಳೆಯಲು ಸಾಧ್ಯ ಎಂದು ಹೇಳಿದರು.



ಇದೇ ಸಂದರ್ಭ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ ಮಾಡಲಾಯಿತು. ಜೊತೆಗೆ 2025-26ನೇ ಸಾಲಿನ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಸರ್ಕಾರದ ಗ್ರಾಮೀಣ ಪತ್ರಕರ್ತರ ಬಸ್ಪಾಸ್ ಯೋಜನೆಯ ಫಲಾನುಭವಿ ಯೋಗೀಶ್ ಕುಂಭಾಶಿಯವರಿಗೆ ಕಾರ್ಡ್ ವಿತರಿಸಲಾಯಿತು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಮಂಜುನಾಥ್ ಮಾತನಾಡಿದರು. ಬೆಂಗಳೂರು ಡಾ.ಬಿ.ಆರ್.ಅಂಬೇಡ್ಕರ್ ತಂತ್ರಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಚ್.ಸಂತೋಷ್ ಕುಮಾರ್ ಪತ್ರಕರ್ತರ ಒತ್ತಡ ನಿರ್ವಹಣೆ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು.


ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.


ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಾಸ್ತಾವಿಸಿ ಸ್ವಾಗತಿಸಿದರು. ಉಡುಪಿ ಪ್ರತಿಕಾ ಭವನ ಸಮಿತಿಯ ಸದಸ್ಯ ಮೈಕಲ್ ರೋಡ್ರಿಗಸ್ ಸನ್ಮಾನ ಪತ್ರ ವಾಚಿಸಿದರು. ಸಂಘದ ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು ವಂದಿಸಿದರು. ಅಕ್ಷತಾ ಗಿರೀಶ್ ನಿರೂಪಿಸಿದರು.
