ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಪೂಜಾರಿ ಬೀಜಾಡಿಯವರನ್ನು ನೇಮಿಸಿ – ಕಾರ್ಯಕರ್ತರ ಒಕ್ಕೊರಲ ಒತ್ತಾಯ
ಉಡುಪಿ: ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗಗಳ ನಾಯಕ, ಸದಾ ಸಮಾಜ ಸೇವೆಯ ಮುಂಚೂಣಿಯಲ್ಲಿರುವ ಅಶೋಕ್ ಪೂಜಾರಿ ಬೀಜಾಡಿ ಅವರಿಗೆ ಈ ಜವಾಬ್ದಾರಿಯನ್ನು ನೀಡಬೇಕು ಎಂಬ ಬಲವಾದ ಒತ್ತಾಯ ಕಾರ್ಯಕರ್ತರು ಮತ್ತು ಅಭಿಮಾನಿ ವಲಯದಿಂದ ಕೇಳಿಬರುತ್ತಿದೆ.

ಅಶೋಕ್ ಪೂಜಾರಿ ಅವರು ಈಗಾಗಲೇ ತಮ್ಮ ನಿಸ್ವಾರ್ಥ ಸಮಾಜ ಸೇವೆಯ ಮೂಲಕ ಜಿಲ್ಲೆಯಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದು, ಜನಸಾಮಾನ್ಯರ ಕಷ್ಟ-ಸುಖಗಳಿಗೆ ತಕ್ಷಣ ಸ್ಪಂದಿಸುವ ಅವರ ನಾಯಕತ್ವದ ಗುಣವು, ಕೇವಲ ಉಡುಪಿ ಜಿಲ್ಲೆ ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ತುಂಬಬಲ್ಲದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

ಅಶೋಕ್ ಪೂಜಾರಿ ಬೀಜಾಡಿಯವರ ವಿಶಿಷ್ಟ ಸಂಘಟನಾ ಶಕ್ತಿಯು ಜಿಲ್ಲೆಯ ಯುವ ಜನತೆಯನ್ನು ಪಕ್ಷದ ಸಿದ್ಧಾಂತದತ್ತ ಆಕರ್ಷಿಸಿ, ಸಂಘಟನೆಗೆ ಹೊಸ ಚೈತನ್ಯ ನೀಡುವ ಸಾಮರ್ಥ್ಯ ಹೊಂದಿದೆ. ಪಕ್ಷದ ಹಿರಿಯ-ಕಿರಿಯ ನಾಯಕರನ್ನು ಹಾಗೂ ಸಾಮಾನ್ಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಮುನ್ನಡೆಸುವ ಸೌಮ್ಯ ಸ್ವಭಾವ ಇವರದ್ದಾಗಿದೆ. ಜಿಲ್ಲೆಯ ಮೂಲೆ-ಮೂಲೆಗಳಲ್ಲಿರುವ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ನೇರ ಸಂಪರ್ಕ ಹೊಂದಿರುವ ಇವರು, ಪಕ್ಷದ ತಳಪಾಯವನ್ನು ಮತ್ತಷ್ಟು ಗಟ್ಟಿಗೊಳಿಸಬಲ್ಲರು ಎನ್ನುವುದು ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ.
ಮುಂದಿನ ದಿನಗಳಲ್ಲಿ ಎದುರಾಗಲಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ವಿಜಯ ಪತಾಕೆಯನ್ನು ಹಾರಿಸಲು ಸಾಧ್ಯವಾಗಬೇಕಾದರೆ ಕೆಪಿಸಿಸಿ ನಾಯಕರು ಉಡುಪಿ ಜಿಲ್ಲೆಗೆ ಸಮರ್ಥ ನಾಯಕತ್ವ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನಾ ಚತುರ ಅಶೋಕ್ ಪೂಜಾರಿ ಬೀಜಾಡಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ವೀಕ್ಷಕರಾಗಿ ಆಗಮಿಸುತ್ತಿರುವ ಹಿಮಂತ್ ಸಿಂಗ್ ಪಾಟೀಲ್ ಅವರನ್ನು ಆಗ್ರಹಿಸಿದ್ದಾರೆ.
