ಜಾಗೃತಿ ಮೂಡಿಸುವಲ್ಲಿ ಮಾಧ್ಯಮ ಪರಿಣಾಮಕಾರಿ : ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಡಾ. ಪ್ರೇಮಾನಂದ್ ಅಭಿಪ್ರಾಯ
ಕುಂದಾಪುರ : ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮಗಳು ಜನಮುಖಿಯಾಗಿ ಪರಿಣಾಮಕಾರಿಯಾದ ಪಾತ್ರ ವಹಿಸುತ್ತವೆ. ಪತ್ರಿಕೆಗಳು ನೀಡುವ ಎಚ್ಚರಿಕೆ, ಜಾಗೃತಿ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಹೇಳಿದರು.

ಅವರು ಮಂಗಳವಾರ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್ನಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆಯನ್ನು ಗ್ರಾಮೋಪೋನ್ ನ ಧ್ವನಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಬಳಿಕ ಇತ್ತೀಚೆಗೆ ಅಗಲಿದ ಪತ್ರಕರ್ತ ದಿ.ನಾಗೇಶ ಗಾಣಿಗರಿಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು. ಇದೇ ಸಂದರ್ಭ ಕೆಯುಡಬ್ಲ್ಯುಜೆ 2024 ನೇ ಸಾಲಿನ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರಶಾಂತ ಪಾದೆ ಅವರಿಗೆ ಪತ್ರಿಕೋದ್ಯಮ ದಿನದ ಗೌರವ ಸಲ್ಲಿಸಲಾಯಿತು.

ಹಿರಿಯ ಪತ್ರಕರ್ತ ಮೊಹಮ್ಮದ್ ಆರಿಫ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ಪತ್ರಿಕೆಯ ಓದುವ ಹಸಿವು ಆರಂಭವಾಗಬೇಕು. ಪತ್ರಿಕೆಗಳನ್ನು ಓದುವುದರಿಂದ ಅನುಭವ, ಜ್ಞಾನ ಹೆಚ್ಚುತ್ತದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಾಧ್ಯ. ಸುದ್ಧಿಯೊಂದರ ನಿಖರತೆ, ವಸ್ತುನಿಷ್ಠತೆ ದೊರಕುವುದು ಪತ್ರಿಕೆಗಳಿಂದ ಮಾತ್ರ. ಸಮಾಜದಲ್ಲಿ ಬದಲಾವಣೆ, ಜಾಗೃತಿಗಳಿಗೆ ಸೇತುವಾಗುವುದು ಪತ್ರಿಕೆಗಳು ಎಂದರು.

ಕುಂದಾಪುರ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ಕುಮಾರ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ., ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ) ಮಾತನಾಡಿದರು.

ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿಯ ರಾಘವೇಂದ್ರ ಪೈ, ಚಂದ್ರಮ ತಲ್ಲೂರು, ಯೋಗೀಶ್ ಕುಂಭಾಶಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿನಿಯರಾದ ಅನ್ವಿತಾ, ಅಶ್ವಿನಿ ಪ್ರಾರ್ಥನೆ ನೆರವೇರಿಸಿದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಶ್ರೀಕಾಂತ ಹೆಮ್ಮಾಡಿ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್. ಬೀಜಾಡಿ ವಂದಿಸಿದರು. ಪತ್ರಕರ್ತೆ ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರ್ವಹಿಸಿದರು
