ಸಿದ್ಧಾಪುರ: ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳ ಚದುರಂಗ ಸ್ಪರ್ಧೆ ಸಂಪನ್ನ
ಚದುರಂಗದಾಟ ಮನಸ್ಸನ್ನು ಚುರುಕುಗೊಳಿಸುತ್ತದೆ – ಡಾ. ನಾಗಭೂಷಣ ಉಡುಪ
ಸಿದ್ಧಾಪುರ: ಭಾರತದ ಪ್ರಾಚೀನ ಕ್ರೀಡೆಗಳಲ್ಲಿ ಒಂದಾದ ಚದುರಂಗ (ಚೆಸ್) ಆಟ ಮೆದುಳನ್ನು ಚುರುಕುಗೊಳಿಸುವುದರ ಜೊತೆಗೆ ಏಕಾಗ್ರತೆ ಹೆಚ್ಚಿಸುತ್ತದೆ. ಆ ಮೂಲಕ ಮಕ್ಕಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತದೆ. ಮೈಂಡ್ ಗೇಮ್ ಗಳನ್ನು ಸವಾಲಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪ್ರೇರಣಾದಾಯಿಗಳಾಗಬೇಕು ಎಂದು ಉಡುಪಿ ಜಿಲ್ಲೆಯ ನಿವೃತ್ತ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.

ಅವರು ಸೋಮವಾರ ಜುಲೈ 27ರಂದು ಸಿದ್ಧಾಪುರದ ಸುಮುಖ ಎಜ್ಯುಕೇಶನಲ್ ಟ್ರಸ್ಟ್ ಪ್ರವರ್ತಿತ ಸರಸ್ವತಿ ವಿದ್ಯಾಲಯದಲ್ಲಿ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಕುಂದಾಪುರ ಕ್ಷೇತ್ರ ಶಿಕ್ಷಣ ಇಲಾಖೆ ಸಂಯೋಜಿತ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಚದುರಂಗ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.






ಚದುರಂಗ ಸ್ಪರ್ಧೇಗೆ ಚಾಲನೆ ನೀಡಿದ ಕ್ಷೇತ್ರ ಶೀಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿ, ಇಂದು ವಿದ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ಮೊಬೈಲ್ ನೋಡುವುದರಲ್ಲಿ ಹೆಚ್ಚು ಬಳಸುತ್ತಿದ್ದು, ಚದುರಂಗದಂತಹಾ ಕ್ರೀಡೆಗಳಲ್ಲಿ ತೊಡಗಿಸಿಕೊಂಡರೆ ಶೈಕ್ಷಣಿಕವಾಗಿಯೂ ಹೆಚ್ಚು ಸದೃಢರಾಗಲು ಸಾಧ್ಯ ಎಂದು ಅಭಿಪ್ರಾಯಿಸಿದರು.






ಸಭೆಯ ಅಧ್ಯಕ್ಷತೆಯನ್ನು ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಕುಮಾರ್ ಹೆಗ್ಡೆ ವಹಿಸಿದ್ದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ರೇಖಾ, ಸಂತೋಷ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಶೆಟ್ಟಿ, ಶಿಕ್ಷಣ ಸಂಯೋಜಕ ಶೇಖರ್, ಸರಸ್ವತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ವೇತಾ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಖಾಸಗೀ ಹಾಗೂ ಸರ್ಕಾರೀ ಶಾಲೆಗಳಿಂದ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜ್ಞಾನಸರಸ್ವತಿ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ನಾಗರಾಜ್ ಗುಳ್ಳಾಡಿ ಕಾರ್ಯಕ್ರಮ ನಿರೂಪಿಸಿದರು.
