ನಟ ದ್ವಾರಕೀಶ್ ನಿಧನಕ್ಕೆ ಗಣ್ಯರಿಂದ ಸಂತಾಪ : ಕಳೆದ ವರ್ಷ ಎಪ್ರಿಲ್ ನಲ್ಲಿ ಸುಳ್ಳು ಸುದ್ಧಿ ಹರಡಿದ್ದ ಕಿಡಿಗೇಡಿಗಳು!?
ಬೆಂಗಳೂರು: ಕನ್ನಡ ಚಲನಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಘಿದೆ. ಡಾ. ರಾಜ್ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ದ್ವಾರಕೀಶ್ ತಮ್ಮದೇ ಛಾಪು ಮೂಡಿಸಿದ್ದಾರೆ. ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ..
ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು. ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪೋಸ್ಟ್ ಮಾಡಿದ್ದಾರೆ.
ಅಲ್ಲದೇ ಹಿರಿಯ ನಟಿ ಬಿ.ಸರೋಜಾದೇವಿ, ಭವ್ಯ, ಜಯಮಾಲಾ, ನಿರ್ದೇಶಕ ಭಾರ್ಗವ, ನಟ ದೊಡ್ಡಣ್ಣ, ರಮೇಶ್ ಅರವಿಂದ್, ಶಿವರಾಜ್ ಕುಮಾರ್ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಕಳೆದ ವರ್ಷ ಎಪ್ರಿಲ್ ತಿಂಗಳಿನಲ್ಲಿ ದ್ವಾರಕೀಶ್ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ಧಿಗಳನ್ನು ಹರಡಿ ಭಿಮಾನಿಗಳನ್ನು ಗೊಂದಲಕ್ಕೀಡುಮಾಡಿದ್ದರು. ಆಗ ಸ್ವತಃ ದ್ವಾರಕೀಶ್ ಅವರೇ ಈ ಬಗ್ಗೆ ಮಾಧ್ಯಮಗಳ ಮೂಲಕ ಸ್ಪಷ್ಟನೆ ನೀಡಿದ್ದರು. ಆದರೆ ಈಗ ಅದೇ ಎಪ್ರಿಲ್ ತಿಂಗಳಿನಲ್ಲಿ ಇಹಲೋಕ ತ್ಯಜಿಸಿರುವುದು ಮಾತ್ರ ನಿಜಕ್ಕೂ ದುರಂತ.