ಬೈಂದೂರು: ಸೋಮೇಶ್ವರ ಗುಡ್ಡಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ್ ಭಂಡಾರಿ

ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಬೈಂದೂರು ತಾಲೂಕಿನ ಸೋಮೇಶ್ವರ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅತಿ ವೃಷ್ಟಿಯಿಂದ ನೆರೆ ಪೀಡಿತವಾದ ನಾವುಂದ ಗ್ರಾಮದ ಸಾಲ್ಬುಡ, ಮರವಂತೆ ಮೊದಲಾದ ಪ್ರದೆಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಾಜೀ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.


ಬಳಿಕ ಕುಂದಾಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಮಂಜುನಾಥ್ ಭಂಡಾರಿ, ಈ ಬಾರಿ ಅತೀ ಹೆಚ್ಚು ಪ್ರಕೃತಿವಿಕೋಪಕ್ಕೆ ನಮ್ಮ ದೇಶ ತುತ್ತಾಗಿದೆ. ಈ ದುರಂತಗಳಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವಾನ ಹೇಳುತ್ತಿದ್ದೇನೆ. ದುರಂತಗಳಿಂದ ಆಗಿರುವ ನಷ್ಟಗಳಿಗೆ ತಾತ್ಕಾಲಿಕ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದರು. ಅಲ್ಲದೇ ಶಾಸ್ವತ ಪರಿಹಾರದ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಬಾರಿಯ ಪ್ರಕೃತಿ ವಿಕೋಪದಲ್ಲಿ ಉಡುಪಿ ಜಿಲ್ಲೆಯಲ್ಲಿ 100 ಕೋಟಿ ನಷ್ಟವನ್ನು ಜಿಲ್ಲಾಡಳಿತ ಅಂದಾಜಿಸಿದ್ದು, ಅದರ ಪರಿಹಾರಕ್ಕೆ ಅಧಿಕಾರಿಗಳ ಜೊತೆಗೆ ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
