ಹೆಬ್ರಿ: ಎಎನ್.ಎಫ್ ಗುಂಡಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ?- ಪಶ್ಚಿಮಘಟ್ಟ ತಪ್ಪಲಿನಲ್ಲಿ ಗುಂಡಿನ ಸದ್ದು
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ!
ಕಸ್ತೂರಿ ರಂಗನ್ ವರದಿ ಹೋರಾಟಕ್ಕೆ ಹಿನ್ನಡೆ ಸಾಧ್ಯತೆ

ಹೆಬ್ರಿ : ಕರ್ನಾಟಕದಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಆಹೋರಾತ್ರಿ ಪೊಲೀಸ್ ಬಂದೂಕುಗಳು ಸದ್ದು ಮಾಡಿವೆ. ಉಡುಪಿ ಜಿಲ್ಲೆಯಲ್ಲಿ ನಕ್ಸಲರೇ ಇಲ್ಲ ಎಂದಿದ್ದ ಆಂಟಿ ನಕ್ಸಲ್ ಫೋರ್ಸ್ ನ ಬಂದೂಕುಗಳು ನವೆಂಬರ್ 18ರ ತಡರಾತ್ರಿ ಗುಂಡಿನ ದಾಳಿ ನಡೆಸಿವೆ. ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ಮಧ್ಯರಾತ್ರಿ ನಡೆದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ನಕ್ಸಲ್ ನಾಯಕ ಎಂದು ಪ್ರಸಿದ್ಧನಾಗಿದ್ದ ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ಪೋಲಿಸ್ ಮೂಲಗಳು ಹೇಳಿಕೊಂಡಿವೆ.
ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡಿದೆ ಎನ್ನುವ ಮಾಹಿತಿಗಳನ್ನು ಆಧರಿಸಿ ಕಳೆದ ಹಲವು ದಿನಗಳಿಂದ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಸೀತಂಬೈಲು ಎಂಬಲ್ಲಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ, ನೇತ್ರಾವತಿ ದಳದ ಮುಖ್ಯಸ್ಥ ಸ್ಥಳೀಯ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ನನ್ನು ಕೊಲ್ಲಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಹೆಬ್ರಿ ತಾಲೂಕಿನ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ (ನವೆಂಬರ್ 18) ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಎಎನ್ಎಫ್ ಪೊಲೀಸರು ಕೊಂದಿದ್ದಾರೆ.
ಸೋಮವಾರ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಿದ್ದಾರೆ ಎನ್ನುವ ಮಾಹಿತಿ ಆಧರಿಸಿ ಕೂಂಬಿಂಗ್ ನಡೆಸಲಾಗಿತ್ತು ಎಂದು ಎಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರಾವಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನಗಳು ವ್ಯಕ್ತವಾಗಿವೆ.
ನಕ್ಸಲ್ ಕಾರ್ಯಾಚರಣೆ ಹಾಗೂ ಎನ್ಕೌಂಟರ್ ಘಟನೆಯಿಂದ ಕಸ್ತೂರಿರಂಗನ್ನು ವರದಿ ಜಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹೋರಾಟಗಳಿಗೆ ಬ್ರೇಕ್ ಬಿದ್ದಂತಾಗಿದೆ. ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಕಸ್ತೂರಿರಂಗನ್ ವರದಿ ಅನುಷ್ಠಾನ ವಿರುದ್ಧ ಸಾರ್ವಜನಿಕ ಪ್ರತಿಭಟನೆಗಳ ನೇತೃತ್ವ ವಹಿಸುವ ನಾಯಕರಲ್ಲಿ ಚಳಿ ಕುಳ್ಳಿರಿಸಿದಂತಾಗಿದೆ.