ಕೊಲ್ಲೂರು ಮೂಕಾಂಬಿಕೆಯ ಪ್ರದಾನ ಅರ್ಚಕ ಮಂಜುನಾಥ ಅಡಿಗ ನಿಧನ

ಕುಂದಾಪುರ:ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಮಂಜುನಾಥ ಅಡಿಗ(64) ಬುಧವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೂಕಾಂಬಿಕಾ ಸನ್ನಿಧಿಯ ಪ್ರಧಾನ ಅರ್ಚಕರಾಗಿ ಮಾತ್ರವಲ್ಲದೆ ಪ್ರಧಾನ ತಂತ್ರಿಯಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು.

ಬುಧವಾರ ಸ್ನಾನಗೃಹದಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದರು. ಬಳಿಕ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಳೆದ ಹದಿನೆಂಟು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ಅಡಿಗರ ಪುತ್ರ ನಿತ್ಯಾನಂದ ಅಡಿಗ ಕೂಡ ಇಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲ ವರ್ಷಗಳಿಂದ ಮಂಜುನಾಥ ಅಡಿಗ ಹೃದಯಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಮಂಜುನಾಥ ಅಡಿಗರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.