ಕುಂದಾಪುರ: ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ – ದಿನೇಶ್ ಹೆಗ್ಡೆ ಮೊಳಹಳ್ಳಿಗೆ ಮನವಿ
ಕುಂದಾಪುರ: ತಾಲೂಕು ಕಚೇರಿ ವ್ಯಾಪ್ತಿಯ ಕುಂದಾಪುರ ಹಾಗೂ ವಂಡ್ಲೆ ಹೋಬಳಿ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೇತೃತ್ವದಲ್ಲಿ ಮೂಲಭೂತ ಸೌಕರ್ಯಗಳ ಬೇಡಿಕೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶುಕ್ರವಾರ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಭೇಟಿ ನೀಡಿದರು.

ಈ ಸಂದರ್ಭ ಪ್ರತಿಭಟನಾ ನಿರತರು ಮನವಿ ನೀಡಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಅಲೆರಾ, ಪ್ರಿಂಟರ್ ಮತ್ತು ಸ್ಕ್ಯಾನರ್, ಲ್ಯಾಪ್ಟಾಪ್ ಹಾಗೂ ಎಲ್ಲಾ ಸರಕಾರದ ಕೆಲಸಗಳು ಮೊಬೈಲ್ ಆಪ್ ಗಳ ಮೂಲಕ ಆಗಬೇಕಾಗಿರುವುದರಿಂದ ಉತ್ತಮ ಗುಣಮಟ್ಟದ ಮೊಬೈಲ್, ಆಡಳಿತ ಅಧಿಕಾರಿಗಳ ಹುದ್ದೆಯಿಂದ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ದಿನೇಶ್ ಹೆಗ್ಡೆ ಮೊಳಹಳ್ಳಿ, ನಮ್ಮ ಸರ್ಕಾರದ ಗಮನಕ್ಕೆ ತಂದು ಸಂಬಂಧಪಟ್ಟ ಕಂದಾಯ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ತಮ್ಮ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಗಣೇಶ್ ಶೇರಿಗಾರ್, ಅಭಿಜಿತ್ ಪೂಜಾರಿ, ಶ್ರೀಧರ್, ರಘುರಾಮ್ ನಾಯಕ್, ಅಶೋಕ್ ಸುವರ್ಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.
