ಬ್ರಹ್ಮಾವರ: ಸಕ್ಕರೆ ಕಾರ್ಖಾನೆ ಹಗರಣ – ಆರೋಪಿಗಳಿಂದಲೇ ಆರೋಪಿಗಳ ತನಿಖೆ – ಸೊರಕೆ ಆಕ್ರೋಶ
ಕುಂದಾಪುರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಸಚಿವ ವಿನಯ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಪ್ರವೇಶ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಶನಿವಾರದಿಂದ ನಡೆಯುತ್ತಿರುವ ರಾತ್ರಿ ರೈತರ ನ್ಯಾಯಗ್ರಹ ಧರಣಿ ಕಾರ್ಯಕ್ರಮದಲ್ಲಿ ಭೇಟಿ ನೀಡಿ ಅವರು ಮಾತನಾಡಿದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಹುಟ್ಟು ಬೆಳವಣಿಗೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ರೈತರ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಬೇಕಾಗಿದ್ದ ಸಕ್ಕರೆ ಕಾರ್ಖಾನೆ, ಇಂದು ತನ್ನ ಅಸ್ತಿತ್ವವನ್ನೇ ಕಳೆದುಕೊಂಡು ಗುಜರಿಯಲ್ಲೂ ಅವ್ಯವಹಾರ ನಡೆಸುವ ಸ್ಥಿತಿ ಬಂದಿರುವುದು ನಿಜಕ್ಕೂ ಕರಾವಳಿಗೆ ದುರಂತದ ಸಂಗತಿ ಎಂದರು.

ಈ ಬಗ್ಗೆ ಎಫ್ಐಆರ್ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ತಂದು ಬಳಿಕ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಿತು. ಆದರೆ ಈ ತನಿಖೆಯನ್ನು ನಾವು ಒಪ್ಪಲು ಸಾಧ್ಯವಿಲ್ಲ. ಯಾಕೆಂದರೆ ಆರೋಪಿಯ ವಿಚಾರಣೆಯನ್ನು ಆರೋಪಿಯೇ ನಡೆಸಿದಂತಾಗಿರುವುದು ಈ ತನಿಖೆಯಿಂದ ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಇಲಾಖೆಗಳು ಸಮಗ್ರವಾದ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಜೊತೆಗೆ ರೈತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು.