ಕುಂದಾಪುರ: ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕತ್ತರಿಸಿ ಧಾರ್ಮಿಕ ಭಾವನೆಗೆ ಕುಂದು – ಅಧಿಕಾರಿ ವಿರುದ್ಧ ಕ್ರಮಕ್ಕೆ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಆಗ್ರಹ

ಕುಂದಾಪುರ: ಎಪ್ರಿಲ್ 16ರಂದು ಬೆಳಿಗ್ಗೆ .30ಕ್ಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ಇಂಜಿನೀಯರಿಂಗ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿ.ಇ.ಟಿ) ನಿರ್ಬಂಧವನ್ನು ವಿಧಿಸಿ ಧಾರ್ಮಿಕ ಭಾವನೆಗಳಿಗೆ ಫಾಸಿ ಉಂಟುಮಾಡಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿರುವ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ , ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕುಂದಾಪುರದಲ್ಲಿ ಗುರುವಾರ ಬೆಳಿಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿರುವ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ನ ಎಸ್. ಕೃಷ್ಣಾನಂದ ಛಾತ್ರ, ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ಇಂಜಿನೀಯರಿಂಗ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೈಹಿಕ ತಪಾಸಣೆ ಮಾಡುವ ಸೋಗಿನಲ್ಲಿ ಯಜ್ಞೋಪವೀತ ಧರಿಸಿದ್ದ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಪರೀಕ್ಷಾ ಕೇಂದ್ರದ ಅಧಿಕಾರಿಗಳು ದುರುದ್ದೇಶ ಪೂರ್ವಕವಾಗಿ ಹಾಗೂ ವಿದ್ಯಾರ್ಥಿಗಳ ಇಚ್ಛೆಗೆ ವಿರುದ್ಧವಾಗಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ್ದಾರೆ. ಅಷ್ಟಕ್ಕೂ ನಿಲ್ಲದ ಅಧಿಕಾರಿಗಳು, ಮತ್ತೊಮ್ಮೆ ಜನಿವಾರ ಧರಿಸಿಕೊಂಡು ಬಂದರೆ ನಿಮ್ಮನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಕೊಡುವುದಿಲ್ಲವೆಂದು ಬೆದರಿಕೆಯೊಡ್ಡಿ ವಿದ್ಯಾರ್ಥಿಗಳಿಗೆ ಧಾರ್ಮಿಕವಾಗಿ ಹಾಗೂ ಮಾನಸಿಕವಾಗಿ ಫಾಸಿ ಮಾಡಿ ಯಜ್ಞೋಪವೀತವನ್ನು ಅಕ್ರಮವಾಗಿ ತುಂಡು ಮಾಡಿ ಕಸದ ಬುಟ್ಟಿಗೆ ಹಾಕಿದ್ದು ಅಕ್ಷಮ್ಯ ಎಂದಿದ್ದಾರೆ.

ಪ್ರದಾನ ಕಾರ್ಯದರ್ಶಿ ವಾದಿರಾಜ ಹೆಬ್ಬಾರ್ ಮಾತನಾಡಿ, ಯಾವುದೇ ಪ್ರವೇಶ ನಿಯಮಗಳಲ್ಲಿ ಯಜ್ಞೋಪವೀತವನ್ನು ಧರಿಸಿ ಪರೀಕ್ಷೆಯಲ್ಲಿ ಪಾಲುಗೊಳ್ಳಲು ನಿರ್ಬಂಧ ಇಲ್ಲದಿದ್ದರೂ, ವೈಯಕ್ತಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯಕ್ಕೆ ಸಾರ್ವಜನಿಕವಾಗಿ ಧಕ್ಕೆ ಉಂಟುಮಾಡಿದ್ದಾರೆ. ಈ ಕೃತ್ಯದಿಂದ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯಜ್ಞೋಪವೀತ ಧಾರಣೆಯ ನಂಬಿಕೆಯುಳ್ಳ ಸಾರ್ವಜನಿಕರ ಭಾವನೆಗಳಿಗೆ ತೀವ್ರವಾದ ಫಾಸಿ ಉಂಟು ಮಾಡಿದೆ.ಆದುದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತಾವು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.