ಸರ್ಕಾರೀ ಆಸ್ಪತ್ರೆಯಲ್ಲಿ ಡಾಟಾ ಎಂಟ್ರಿ ಸಿಬ್ಬಂದಿಗಳಿಗೆ ನೋಟೀಸು : ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕ ಗಂಟಿಹೊಳೆ
ಕುಂದಾಪುರ: ಉಡುಪಿ ಜಿಲ್ಲೆಯ ಸರ್ಕಾರೀ ಆಸ್ಪತ್ರೆಗಳಲ್ಲಿ ನಿಯೋಜನೆಗೊಂಡಿದ್ದ ಡಾಟಾ ಎಂಟ್ರಿ ಸಿಬ್ಬಂದಿಗಳನ್ನು ಏಕಾಏಕೀ ನೋಟೀಸು ನೀಡಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಇಂದು ಕುಂದಾಪುರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಸಿಬ್ಬಂದಿಗಳ ಜೊತೆಗೆ ಮಾತನಾಡಿದರು. ಬಳಿಕ ಸರ್ಕಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಗಡುವು ನೀಡಿ ಪ್ರತಿಭಟನೆಯ ಎಚ್ಚರಿಕೆ ನೀಡಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವು ಸರ್ಕಾರೀ ಇಲಾಖೆಗಳಲ್ಲಿ ಡಾಟಾ ಎಂಟ್ರಿ ಸಿಬ್ಬಂದಿಗಳನ್ನು ಈ-ಆಡಳಿತದ ನೆಪದಲ್ಲಿ ನೋಟೀಸು ನೀಡಿ ಕೆಲಸದಿಂದ ತೆಗೆದು ಹಾಕಲಾಗಿದೆ. ಕುಂದಾಪುರ ತಾಲೂ ಆಸ್ಪತ್ರೆಯಲ್ಲಿಯೂ ಇದೇ ರೀತಿಯ ಕ್ರಮಕ್ಕೆ ಮುಂದಾಗಿದ್ದಾರೆ. ನಿನ್ನೆ ರಾತ್ರಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಎಂದು ಸಿಬ್ಬಂದಿಗಳನ್ನು ಕೆಲಸಕ್ಕೆ ಬರುವಂತೆ ಸೂಚಿಸಿದ್ದಾರೆ. ಆದರೆ ತೆಗೆದು ಹಾಕಲು ನೋಟೀಸು ನೀಡಿದವರು ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಯಾವುದೇ ಲಿಖಿತ ಆದೇಶ ನೀಡಿಲ್ಲ ಎಂದ ಅವರು, ಈ ಬಗ್ಗೆ ಸರ್ಕಾರ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮಕ್ಕೆ ಮುಂದಾಗದೇ ಇದ್ದರೆ ಉಡುಪಿ ಜಿಲ್ಲೆಯ ಎಲ್ಲಾ ಶಾಸಕರು ಆಯಾ ಆಸ್ಪತ್ರೆಗಳ ಮುಂದೆ ಸಾರ್ವಜನಿಕರೊಂದಿಗೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.