ಕೋಟೇಶ್ವರ: ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವನಿಧಿ ಪ್ರಚಾರ ಮತ್ತು ನೋಂದಣಿ ಅಭಿಯಾನ

ಕುಂದಾಪುರ: ಇಲ್ಲಿನ ಕೋಟೇಶ್ವರದ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಯಿತು.

ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮಾತನಾಡಿ, ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಚಾರ ನಡೆಸಲಾಗುತ್ತಿದೆ ಎಂದರು. ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ದೀಕ್ಷಿತ್ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯ ಝಾಹಿರ್ ಮತ್ತು ಕಾಲೇಜಿನ ಉಪನ್ಯಾಸಕರಾದ ಡಾ. ಶೇಖರ್ ಬಿ, ಕಾರ್ತಿಕ್ ಪೈ ಉಪಸ್ಥಿತರಿದ್ದರು. ಅಸಿಸ್ಟೆಂಟ್ ಪ್ರೊಫೆಸರ್ ರಂಜಿತ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಚೈತನ್ಯ ವಂದಿಸಿ, ರಶ್ಮಿ ನಿರೂಪಿಸಿದರು.
