ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆ – ಮದ್ರಾಸ್ ಮೂಲದ ಇಂಜಿನಿಯರ್ ಯುವತಿ ಆರೆಸ್ಟ್!
ಕುಂದಾಪುರ: ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳಿಗೆ, ವೈದ್ಯಕೀಯ ಸಂಸ್ಥೆಗಳಿಗೆ ಈಮೇಲ್ ಸಂದೇಶ ಕಳುಹಿಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ಚೆನ್ನೈ ಮೂಲದ ಇಂಜಿನಿಯರ್ ಯುವತಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಉಡುಪಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಾರದ ಹಿಂದೆ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಪೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ ಮತ್ತು ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ ಎಂದು ಬರೆಯಲಾಗಿದ್ದ ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಇಮೇಲ್ ಸಂದೇಶ ಕಳುಹಿಸಿ ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಮೇಲ್ ಬೆದರಿಕೆಯ ಬೆನ್ನತ್ತಿದ್ದ ಅಹಮದಾಬಾದ್ ಪೊಲೀಸರು ಚೆನ್ನೈ ಮೂಲದ ಆರೋಪಿ ಇಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ ಎಂದಿರುವ ಎಸ್ಪಿ ಹರಿರಾಂ ಶಂಕರ್, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ನಮ್ಮ ಕಸ್ಟಡಿಗೆ ನೀಡುವಂತೆ ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆಯಲಾಗುವುದು. ಅವರ ತನಿಖೆ ಮುಗಿದ ಬಳಿಕ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ. ಅದರಂತೆ ಉಡುಪಿಯ ಪ್ರಕರಣದ ತನಿಖೆಯನ್ನು ನಡೆಸಲಾಗುವುದು ಎಂದಿದ್ದಾರೆ.
