ವಿದ್ಯಾರಣ್ಯ: ದೇಶದ ಭವಿಷ್ಯ ಯುವಜನ, ವಿದ್ಯಾರ್ಥಿಗಳ ಕೈಯಲ್ಲಿದೆ – ಎಸ್ಪಿ ಹರಿರಾಂ ಶಂಕರ್


ಕುಂದಾಪುರ : ಯಾವುದೇ ದೇಶದ ಭವಿಷ್ಯ ಯುವಜನ ಮತ್ತು ವಿದ್ಯಾರ್ಥಿಗಳ ಕೈಯಲ್ಲಿದೆ. ಕಠಿಣ ಪರಿಶ್ರಮ, ಪ್ರಾಮಾಣಿಕ ಪ್ರಯತ್ನಗಳಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ. ಉತ್ತಮ ಸಾಧಕರನ್ನು ಮಾರ್ಗದರ್ಶಕರನ್ನಾಗಿಟ್ಟುಕೊಂಡು ತಮ್ಮ ಗುರಿಯ ಕಡೆಗೆ ಹೆಜ್ಜೆ ಹಾಕಬೇಕು. ಬಾಲ್ಯದಲ್ಲಿಯೇ ಮಕ್ಕಳು ದಾರಿತಪ್ಪಿದಾಗ ತಿದ್ದುವ ಕೆಲಸ ನಾವು ಮಾಡಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.


ಕುಂದಾಪುರದ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರಾಯೋಜಿತ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.


ದಕ್ಷ ಅಧಿಕಾರಿ ಮಧುಕರ ಶೆಟ್ಟಿಯವರಂತಹವರು ನಮಗೆ ಪ್ರೇರಣೆಯಾಗಬೇಕು. ಮೊಬೈಲ್ ಬಳಕೆಯಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಎಚ್ಚರ ವಹಿಸಬೇಕು. ತಮ್ಮ ಸಮಸ್ಯೆಯನ್ನು ಮುಚ್ಚಿಡದೆ ಅದನ್ನು ನೇರವಾಗಿ ಮನೆಯವರ ಮೂಲಕ ಪೊಲೀಸರೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶ, ಲಿಂಕ್ ಗಳನ್ನು ನಂಬಬೇಡಿ. ಖಾಸಗೀ ಫೋಟೋಗಳನ್ನು ಅಪ್ಲೋಡ್ ಮಾಡಬೇಡಿ. ತಮಾಷೆಗೂ ಮಾದಕ ವಸ್ತುಗಳನ್ನು ಉಪಯೋಗಿಸಬೇಡಿ. ಸಿನಿಮಾ ಹೀರೋಯಿಸಂ ಬಿಟ್ಟು ಕಾನೂನು ಪ್ರಕಾರ ದೇಶ ಸೇವೆ ಮಾಡಲು ವಿದ್ಯಾರ್ಥಿಗಳು ಸಿದ್ಧರಾಗಬೇಕು. ಉತ್ತಮ ಮನುಷ್ಯ, ಆದರ್ಶ ವ್ಯಕ್ತಿಯಾಗಿ ಬೆಳೆಯಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಹೇಳಿದರು.


ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಪ್ರದೀಪ ಕೆ. ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಟ್ರಸ್ಟ್ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ವಿನಯ ಕುಮಾರ್ ಕೆ. ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಪ್ರಾಂಶುಪಾಲ ರಂಜನ್ ಶೆಟ್ಟಿ ವಂದಿಸಿದರು.

