ಕುಂದಾಪುರ: ಕೊಕ್ಕರ್ಣೆ – ಮಂದಾರ್ತಿ- ಕುಂದಾಪುರ ಸಂಪರ್ಕಿಸುವ ಸರ್ಕಾರೀ ಬಸ್ ಓಡಾಟಕ್ಕೆ ಅಜಿತ್ ಕಮಾರ್ ಶೆಟ್ಟಿ ಮನವಿ

ಕುಂದಾಪುರ: ನಿರಂತರ ಸಾಮಾಜಿಕ ಹೋರಾಟಗಳ ಮೂಲಕ ಗಮನ ಸೆಳೆಯುತ್ತಿರುವ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ ಅವರು ಕೊಕ್ಕರ್ಣೆ – ಕುಂದಾಪುರ ಮಾರ್ಗದಲ್ಲಿ ಸರ್ಕಾರಿ ಬಸ್ ಓಡಿಸಲು ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಮಾರ್ಗದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿದಿನ ಓಡಾಡುತ್ತಿದ್ದು, ಕೋಟ ವಿವೇಕ ಜೂನಿಯರ್ ಕಾಲೇಜ್ ಗೆ, ಕುಂದಾಪುರ ಹಾಗೂ ಉಡುಪಿಗೆ ಉನ್ನತ ವ್ಯಾಸಂಗಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದೇ ತೊಂದರೆಯಾಗುತ್ತಿದೆ ಎಂದು ಅವರು ಮನವಿ ಮಾಡಿದ್ದಾರೆ.

ಗುರುವಾರ ಕರ್ನಾಟಕ ಸರ್ಕಾರದ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರನ್ನು ಸ್ವತಃ ಭೇಟಿ ಮಾಡಿ ಸಸಿಹಸ್ತಾಂತರ ನಡೆಸಿ ತಮ್ಮ ಮನವಿ ನೀಡಿದರು. ಇದೇ ಸಂದರ್ಭ ಪತ್ರಿಕೋದ್ಯಮದ ಭೀಷ್ಮ ಎಂದೇ ಹೆಸರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟಿಯವರ ಊರಾದ ಉಡುಪಿ ಜಿಲ್ಲೆಯ ವಡ್ಡರ್ಸೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವ ಕುರಿತು ಮನವಿ ಸಲ್ಲಿಸಲಾಯಿತು.

ಬಳಿಕ ಪ್ರತಿಕ್ರಿಯಿಸಿದ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮಾಲೋಚನೆ ಮಾಡಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
