ಕೋಟ: ಕುಟುಂಬ ನಿರ್ವಹಣೆಯಲ್ಲಿ ಮುಳುಗುವ ಮಹಿಳೆಯರು ಆರೋಗ್ಯದ ಕಡೆಗೂ ಗಮನಕೊಡಿ – ಜ್ಯೋತಿ ಹೆಬ್ಬಾರ್
ಕೋಟ ಮಹಿಳಾ ಕಾಂಗ್ರೆಸ್ ನಿಂದ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮ
ಕುಂದಾಪುರ: ತಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸದಾ ಚಿಂತಿಸುವ, ಕಾಳಜಿ ವಹಿಸುವ ನಮ್ಮ ಮಹಿಳೆಯರು ತಮ್ಮ ಆರೋಗ್ಯದ ಗಮನ ಹರಿಸುವುದನ್ನು ಮರೆತು ಬಿಡುತ್ತಾರೆ. ಹಾಗಾಗಿ ಅವರಲ್ಲಿ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ನಂತಹ ಮಾರಕ ರೋಗಗಳು, ಇನ್ನಿತರ ಸೋಂಕು ತಗುಲುವ ಸಂಭವ ಹೆಚ್ಚಾಗಿರುತ್ತದೆ. ಪ್ರತಿಯೊಬ್ಬ ಮಹಿಳೆಯೂ ತನ್ನ ಮಾಸಿಕ ಋತು ಚಕ್ರದ ದಿನಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಅಖಿಲ ಭಾರತ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಾಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯಾ ರೆಡ್ಡಿಯವರು ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹೇಳಿದರು.

ಅವರು ಶನಿವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಮಹಿಳಾ ಕಾಂಗ್ರೆಸ್ ನ ಸಂಯುಕ್ತ ಆಶ್ರಯದಲ್ಲಿ ನಡೆದ “ನಾರೀ ನ್ಯಾಯ್” ಕಾರ್ಯಕ್ರಮದ ಮಹತ್ವದ ಯೋಜನೆ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮ ಕಾಂಗ್ರೆಸ್ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ವಾರ್ಡ್ ಹಾಗೂ ಗುಂಡ್ಮಿ ಗ್ರಾಮದ ಚೆಲ್ಲಮಕ್ಕಿ ವಾರ್ಡ್ ನಲ್ಲಿ ಯುವತಿಯರಿಗೆ ಮತ್ತು ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಗೀತಾ ವಾಗ್ಳೆಯವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಮೊದಲಿನಿಂದಲೂ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಬರುತ್ತಿದೆ. ಕೋವಿಡ್ ಸಮಯದಲ್ಲೂ ಬಡ ಕುಟುಂಬದ ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸಲಾಗಿತ್ತು. ಅಲ್ಲದೇ ಗೃಹ ಲಕ್ಷ್ಮಿ ಯಂತಹ ಹಲವು ಯೋಜನೆಗಳು ಬಡ ಮಹಿಳೆಯರಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಹಳಷ್ಟು ಸಹಕಾರಿಯಾಗಿವೆ ಎಂದರು.

ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ.ಪಿ.ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಅಮೃತೇಶ್ವರಿ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಸುಧಾ ಪೂಜಾರಿ ಮತ್ತು ಜ್ಯೋತಿ ದೇವದಾಸ್ ಕಾಂಚನ್, ಐರೋಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಪದ್ಮಾವತಿ ಗೋಪಾಲ್, ಪಾಂಡೇಶ್ವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
