ಮಂಗಳೂರು: ಅಂತಾರಾಷ್ಟೀಯ ವಿಮಾನ ನಿಲ್ದಾಣ ಭೂಸ್ವಾಧೀನ ಪ್ರಕ್ರಿಯೆ – ಸಂತ್ರಸ್ಥರಿಗೆ ಗರಿಷ್ಟ ಪರಿಹಾರ ಒದಗಿಸಲು ನೆರವಾದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪದ್ಮರಾಜ್
ಮಂಗಳೂರು: ಇಲ್ಲಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಭೂಸಂತ್ರಸ್ಥ ಫಲಾನುಭವಿಗಳಿಗೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರವು (MIAGL) ಈ ವರ್ಷ ಅತ್ಯಧಿಕ ಮೊತ್ತದ ಪರಿಹಾರ ನೀಡುವಲ್ಲಿ ಸಹಕರಿಸಿದ ಕರ್ನಾಟಕ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್ ಪೂಜಾರಿ ಅಭಿನಂದಿಸಿದ್ದಾರೆ.

ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (Airport Authority) ಮಂಗಳೂರು ವಿಮಾನ ನಿಲ್ದಾಣ ಖಾಸಗಿ ಒಡೆತನದಲ್ಲಿದ್ದರೂ, ರಾಜ್ಯ ಸರ್ಕಾರಕ್ಕೆ ಮೊದಲ ಬಾರಿಗೆ ಹಣ ಪಾವತಿಸಲು ಒಪ್ಪಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಎಲ್ಲಾ ಫಲಾನುಭವಿಗಳಿಗೆ ಸಹಾಯ ಮಾಡಲು ಪಾರದರ್ಶಕ ರೀತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಿದೆ. ಈ ಹಿಂದೆ ಕೇಂದ್ರ ಸರ್ಕಾರ ಭೂಮಿ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿತ್ತು. ಆದರೆ ಸ್ಥಳೀಯ ಭೂಸಂತ್ರಸ್ಥರಿಗೆ ಪರಿಹಾರ ಸಿಗಲೇಬೇಕೆಂದು ರಾಜ್ಯ ಸರ್ಕಾರ ದೃಢವಾಗಿ ನಿಂತು ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗಾಗಿ 32.97 ಎಕರೆ ಜಾಗ ಸ್ವಾಧೀನಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆ ಪ್ರಕಾರ ಭೂಮಿ ಕಳೆದುಕೊಳ್ಳುವವರಿಗೆ ಗರಿಷ್ಠ ಪರಿಹಾರ ನೀಡುವಂತೆ ಪದ್ಮರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್ರವರ ಗಮನ ಸೆಳೆದಿದ್ದರು. ಜೊತೆಗೆ ಸ್ಪೀಕರ್ ಯು.ಟಿ.ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ತೂರು ಶಾಸಕ ಅಶೋಕ್ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮಂಜನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಎಂದಿಗೂ ಜನತೆಯ ಪರವಾಗಿದೆ ಎನ್ನುವುದಕ್ಕೆ ಇದು ಒಂದು ನಿದರ್ಶನ ಎಂದು ಪದ್ಮರಾಜ್ ಸರ್ಕಾರವನ್ನು ಹೊಗಳಿದ್ದಾರೆ.
